Site icon ಉಡುಪಿ ನ್ಯೂಸ್ ಪ್ಲಸ್

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಣಿ ಸಭೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಥಮ ಕಾರ್ಯಕಾರಿಣಿ ಸಭೆಯು ಬ್ಲಾಕ್ ಕಾಂಗ್ರೆಸ್ ನೂತನ ಅದ್ಯಕತ ಶುಭದರಾವ್ ಅದ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮೀಣ ಸಮಿತಿಯ ಅದ್ಯಕ್ಷರುಗಳು ಹಾಗೂ ವಿವಿಧ ಘಟಕಗಳ ಅದ್ಯಕ್ಷರುಗಳ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ನೂತನವಾಗಿ ಆಯ್ಕೆಯಾದ ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮೀಣ ಸಮಿತಿಯ ಅಧ್ಯಕ್ಷರುಗಳು, ಮತ್ತು ವಿವಿಧ ಘಟಕಗಳ ಅದ್ಯಕ್ಷರುಗಳನ್ನು ಶಾಲು ಹೊದಿಸಿ ಅಭಿನಂದಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಪಕ್ಷದ ಬಲವರ್ದನೆಗಾಗಿ ಶ್ರಮಿಸುವಂತೆ ಕರೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಮಾತನಾಡಿ ವಿವಿಧ ಘಟಕಗಳ ನೂತನ ಅಧ್ಯಕ್ಷ ಪದಾಧಿಕಾರಿಗಳ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವಿವರಿಸಿದರು.
ಹಿರಿಯ ವಕೀಲರು, ಕಾಂಗ್ರೆಸ್ ಮುಖಂಡರಾದ ಶೇಖರ ಮಡಿವಾಳರವರು ಮಾತನಾಡುತ್ತಾ ಪ್ರಸ್ತುತ ದೇಶವನ್ನು ಆಳುತ್ತಿರುವರಿಂದ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಸಂವಿಧಾನ ಇರುವ ಕಾರಣ ಇಂದು ದೇಶದ ಜನ ಸಾಮಾನ್ಯನೂ ಸಮಾನ ಹಕ್ಕುಗಳಿಂದ ಬದುಕುವಂತಾಗಿದೆ, ಇಂತಹ ಶ್ರೇಷ್ಠ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧಾಕರ ಕೋಟ್ಯಾನ್ ಸಂದರ್ಬೋಚಿತವಾಗಿ ಮಾತನಾಡಿದರು. ಪಕ್ಷ ಸೇರ್ಪಡೆ: ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿಕೊಂಡು ಕುಕ್ಕುಂದೂರು ಗ್ರಾಮ ಪಂಚಾಯತಿಗೆ 3 ಬಾರಿ ಚುನಾಯಿತ ಸದಸ್ಯರಾಗಿ ಮತ್ತು ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸುಂದರ ಅವರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಅವರನ್ನು ಪಕ್ಷದ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡಿ ಬರಮಾಡಿಕೊಳ್ಳಲಾಯಿತು. ಸನ್ಮಾನ: ಇತ್ತೀಚೆಗೆ ನಡೆದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗಳಿಗೆ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸಿರಿಯಣ್ಣ ಶೆಟ್ಟಿ ಹಿರ್ಗಾನ, ಕೃಷ್ಣ ಶೆಟ್ಟಿ ನಲ್ಲೂರು, ಜಾನ್ ಆರ್ ಡಿ’ಸಿಲ್ವ ಸಾಣೂರು ಇವರನ್ನು ಫಲಪುಷ್ಪ, ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಒಗ್ಗೂಡುವಿಕೆಯೊಂದಿಗೆ ಆರಂಭವಾಗಲಿರುವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಕಳ ಪ್ರವರ್ತಕರಾದ ಅನಿಲ್ ಪೂಜಾರಿ ಮಾಳ ಅವರು ಸೊಸೈಟಿಯ ಕುರಿತು ಮಾಹಿತಿಯನ್ನು ಹಂಚಿಕೊಂಡರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ಉಮೇಶ್ ರಾವ್ ಬಜಗೋಳಿ, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಭಾನು ಭಾಸ್ಕರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಡಾ. ಪ್ರೇಮದಾಸ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಮೇಶ್ ಬಜಕಳ ಅವರು ನಾಡ ಭಕ್ತಿ ಗೀತೆಯನ್ನು ಹಾಡಿದರು ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಆಚಾರ್ಯ ಇನ್ನಾ ಅವರು ಸ್ವಾಗತಿಸಿದರು, ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷರಾದ ಅಜಿತ್ ಹೆಗ್ಡೆ ಧನ್ಯವಾದವನ್ನಿತ್ತರು ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version