Site icon ಉಡುಪಿ ನ್ಯೂಸ್ ಪ್ಲಸ್

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಬ್ರಹ್ಮಾವರ ತಾಲೂಕಿನ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾವಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕರಾದ ಪ್ರಸನ್ನ ಕುಮಾರ್ ಶೆಟ್ಟಿರವರು ತುರ್ತು ಕಾರ್ಯದ ನಿಮಿತ್ತ ಗೈರಾದುದರಿಂದ ಅಧ್ಯಕ್ಷತೆಯನ್ನು ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಾವಂಜೆ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಶೆಟ್ಟಿ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಜಯಂತಿ, ಶಿಕ್ಷಕಿ ನಿಶಾಂತಿ ಎಸ್. ಕರವೇ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೇರಿಗಾರ್ತಿ, ಉಪಾಧ್ಯಕ್ಷರಾದ ಎಂ ಎಸ್ ಸಯ್ಯದ್ ನಿಜಾಮ್, ಸುಧೀರ್ ಪೂಜಾರಿ, ಕಿರಣ್ ಪ್ರತಾಪ್, ದೇವಕಿ ಬಾರ್ಕೂರು, ಮೊದಲಾದವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕೊಡೆಯನ್ನ ವಿತರಿಸಿದರು. ಇದೇ ವೇಳೆ ರಮೇಶ್ ಶೆಟ್ಟಿ ಕೊಡಮಾಡಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಹಾವಂಜೆ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ನಿಶಾಂತಿ ಎಸ್. ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರವೇ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ಅವರು ಮಾತನಾಡಿ ಕರವೇ ಉಡುಪಿ ಜಿಲ್ಲಾ ಮಹಿಳಾ ಘಟಕ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು, ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ ಪ್ರಾಸ್ತವಿಕ ನುಡಿದು ಸ್ವಾಗತಿಸಿದರು. ಶಿಕ್ಷಕಿ ವಿನೋದ ಕಾರ್ಯಕ್ರಮ ನಿರೂಪಿಸಿದರು. ದೇವಕಿ ಬಾರ್ಕೂರು ವಂದಿಸಿದರು.

Exit mobile version