Site icon ಉಡುಪಿ ನ್ಯೂಸ್ ಪ್ಲಸ್

ದಂಡತೀರ್ಥ:ವಾರ್ಷಿಕ ಕ್ರೀಡಾಕೂಟ

ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟವು ದಿನಾಂಕ:27-11-2025 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಪ್ರಶಾಂತ್ ಪ್ಯಾರಾ ಮೆಡಿಕಲ್ ಕಾಲೇಜಿನ ನಿರ್ದೇಶಕಿ ಹಾಗೂ ದಂಡತೀರ್ಥ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ಡಾ. ಪನ್ನಾ ಪಿ. ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಗೆಲುವು ಸೋಲುಗಳನ್ನು ಸಮಾನವಾಗಿ ಸ್ವೀಕರಿಸಿ ಉತ್ತಮ ಕ್ರೀಡಾಪಟುಗಳಾಗಿ ಮೂಡಿ ಬನ್ನಿ ಎಂಬ ಸಂದೇಶವನ್ನು ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಉಡುಪಿ ದಕ್ಷಿಣ ವಲಯದ ದೈಹಿಕ ಶಿಕ್ಷಣ ಅಧಿಕಾರಿ ರವೀಂದ್ರ ನಾಯಕ್ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ಶಾರೀರಿಕ ಮತ್ತು ಮಾನಸಿಕ ದೃಢತೆಯನ್ನು ಪಡೆಯುವುದರೊಂದಿಗೆ ಶಾಲೆಗೆ ಕೀರ್ತಿ ತನ್ನಿ ಎಂಬ ಸಂದೇಶವನ್ನು ನೀಡಿದರು.
ಉಡುಪಿ ದಕ್ಷಿಣ ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಅವರು ಮಾತನಾಡಿ ಪಾಠ- ಪಾಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಅವಿಭಾಜ್ಯ ಅಂಗ. ಇಂದಿನ ಕಲಿಕೆ ಮುಂದಿನ ಜೀವನಕ್ಕೆ ಅಡಿಪಾಯವನ್ನೊದಗಿಸುತ್ತದೆ ಎಂಬ ಸಂದೇಶವನ್ನು ನೀಡಿದರು.
ವಿದ್ಯಾರ್ಥಿಗಳ ಪಥ- ಸಂಚಲನದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿದ ಕಾಪು ಪೊಲೀಸ್ ಠಾಣೆಯ ಎ.ಎಸ್. ಐ.ರವೀಶ್ ಹೊಳ್ಳ ಇವರು ಶುಭ ಹಾರೈಸಿದರು.
ಸಮಾರಂಭದಲ್ಲಿ ದಂಡತೀರ್ಥ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಅಲ್ಬನ್ ರೋಡ್ರಿಗಸ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕೃಪಾ ಅಮ್ಮನ್ನ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಬಿ. ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾಸಂಸ್ಥೆಯ ಪ್ರಾಂಶುಪಾಲ ಎಂ. ನೀಲಾನಂದ ನಾಯ್ಕ್ ಸ್ವಾಗತಿಸಿದರು.
ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ವಂದಿಸಿದ ಈ ಕಾರ್ಯಕ್ರಮವನ್ನು ಸಹ-ಶಿಕ್ಷಕಿ ಶ್ರೀಮತಿ ಶೋಭಾ ಹಾಗೂ ಶಿಕ್ಷಕ ಉದಯ ಕುಮಾರ್ ನಿರೂಪಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ್ ಶೆಟ್ಟಿಯವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ಪ್ರದರ್ಶನ ನಡೆಯಿತು.

Exit mobile version