
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾಪು ಪುರಸಭೆ, ಡೇ – ನಲ್ಮ್ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಶ್ರೀ ದೇವಿ ಸ್ಪೋರ್ಟ್ ಮತ್ತು ಕಲ್ಟರಲ್ ಕ್ಲಬ್ ಕಾಪು, ಅರಣ್ಯ ಇಲಾಖೆ ಪಡುಬಿದ್ರಿ ವಲಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಹಾಗೂ ಆರೋಗ್ಯ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ ಬೆಂಗಳೂರು, ಯುನಿಸೆಫ್ ಇವರ ಸಹಯೋಗದೊಂದಿಗೆ ಸೆ. 15 ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಘೋಷಣ್ ಅಭಿಯಾನ, ಘೋಷಣಾ ಮಾಸಾಚರಣೆ – 2022 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸ್ಟೀವನ್ ಕ್ವಾಡ್ರಸ್ ಮಾತನಾಡಿ, ಮಕ್ಕಳನ್ನು ಕಾಡುತ್ತಿರುವ ಅನಾರೋಗ್ಯ, ನ್ಯೂಟ್ರೀಷಿಯನ್ ಕೊರತೆಯನ್ನು ನೀಗಿಸುವಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಮಹತ್ವಪೂರ್ಣ ಭೂಮಿಕೆಯನ್ನು ನಿಭಾಯಿಸುತ್ತಿದೆ. ಮಕ್ಕಳ ಆರೋಗ್ಯ ರಕ್ಷಣೆಗೆ ಸರಕಾರ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕವಾಗಿ ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಸೇವೆಯನ್ನು ಒದಗಿಸುತ್ತಿದೆ ಎಂದರು. ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್ ಮಾತನಾಡಿ, ಮನೆ ಅಡುಗೆ, ಮನೆ ಔಷಧ ಬಳಕೆಯೊಂದಿಗೆ ಸರಕಾರ ಮತ್ತು ಆರೋಗ್ಯ ಇಲಾಖೆ ಸೂಚಿಸುವ ಆಹಾರ ಕ್ರಮಗಳು, ಔಷಧಿಗಳ ಸೇವನೆಯಿಂದ ಆರೋಗ್ಯ ಪೂರ್ಣ ಬದುಕು ಸಾಗಿಸಲು ಸಾಧ್ಯವಿದೆ ಎಂದರು. ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ ಮತ್ತು ಯುನಿಸೆಫ್ ಸಂಯೋಜಕ ವಿಜಯ್ ಕುಮಾರ್, ಪುರಸಭೆ ಸದಸ್ಯ ನಾಗೇಶ್, ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ / ಪುರಸಭೆ ಸದಸ್ಯ ಅನಿಲ್ ಕುಮಾರ್, ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ ಪ್ರಸ್ತಾವನೆಗೈದರು. ಮೇಲ್ವಿಚಾರಕಿ ಪೂರ್ಣಿಮಾ ಸ್ವಾಗತಿಸಿದರು. ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು. ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.