
ಜೀವನದಲ್ಲಿ ಇಂತಹ ಭ್ರಷ್ಟ ಸರಕಾರ ನೋಡಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಐವತ್ತು ವರ್ಷ ಪೂರ್ಣ ಭ್ರಷ್ಟ ಸರ್ಕಾರವೇ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಭ್ರಷ್ಟಾಚಾರ ಆರಂಭವಾಗಿದ್ದೆ ಕಾಂಗ್ರೆಸ್ ನಿಂದ. ಕಾಂಗ್ರೆಸ್ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ನಮ್ಮ ಆರೋಪ ಮುಚ್ಚಿ ಹಾಕಿಕೊಳ್ಳಲು ಖರ್ಗೆ ಆರೋಪ ಮಾಡುತ್ತಿದ್ದಾರೆ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಸುಳ್ಳು ಎಂದು ಟೀಕಿಸಿದರು. ಉಡುಪಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕಾಪುವಿನಿಂದ ಜನ ಸಂಕಲ್ಪ ಯಾತ್ರೆ ಪ್ರಾರಂಭವಾಗಿದೆ. ನಾಳೆಯಿಂದ ಗದಗ, ಬೆಳಗಾಂ, ಹಾವೇರಿಯಲ್ಲಿ ಸಂಕಲ್ಪಯಾತ್ರೆ ಮುಂದುವರಿಯುತ್ತದೆ. ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿಕೊಟ್ಟು ಪಕ್ಷ ಸಂಘಟನೆ ಮತ್ತು ಜನಸ್ಪಂದನ ಮಾಡುತ್ತೇವೆ. ಎಲ್ಲಾ ಕಡೆಯಿಂದಲೂ ಬಹುತೇಕ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.ಬರಾಜ್ಯದಾದ್ಯಂತ ಕಾರ್ಯಕರ್ತರಲ್ಲಿ ಉತ್ಸಾಹ ಕಾಣುತ್ತಿದ್ದೇವೆ ಎಂದರು. ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಒಂದು ಭ್ರಮೆಯಾಗಿದೆ. ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ನಾವೇ ಬರುತ್ತೇವೆ ಎಂದು ಹೇಳಿದ್ದರು. ಯಡಿಯೂರಪ್ಪನವರು ಮತ್ತು ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲಾರರು ಎಂದು ಹೇಳುತ್ತಿದ್ದರು. ಅಧಿಕಾರ ಮಾಡಿ ಕಾರ್ಯಕ್ರಮ ಕೊಟ್ಟಾಗಲೇ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ. ಸಮಾಜವನ್ನು ಒಡೆದು ಆಳುವ ನೀತಿಯಿಂದ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದಾರೆ. ಸಿದ್ದರಾಮಯ್ಯನವರು ಹೇಳಿದ ಮಾತುಗಳು ಯಾವತ್ತಿಗೂ ಸತ್ಯವಾಗಿಲ್ಲ ಎಂದು ಅವರು ತಿಳಿಸಿದರು.
