Site icon ಉಡುಪಿ ನ್ಯೂಸ್ ಪ್ಲಸ್

ಕಾವೂರು ಜಾತ್ರೆಯಲ್ಲಿ ಹಿಂದೂಗಳಿಗಷ್ಟೇ ವ್ಯಾಪಾರಕ್ಕೆ ಅವಕಾಶ ಬ್ಯಾನರ್ ತೆರವುಗೊಳಿಸುವಂತೆ ಸಿಪಿಎಂ, ಡಿವೈಎಫ್ಐ ಆಗ್ರಹ

ಮಂಗಳೂರು: ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ಸಂಘ ಪರಿವಾರದ ಹೆಸರಿನಲ್ಲಿ ಹಾಕಿರುವ ಬ್ಯಾನರ್ ತೆರವುಗೊಳಿಸುವಂತೆ ಒತ್ತಾಯಿಸಿ ಹಾಗೂ ಈ ವಿಚಾರವಾಗಿ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಪಿಎಂ ಮಂಗಳೂರು ಉತ್ತರ ಸಮಿತಿ ಮತ್ತು ಡಿವೈಎಫ್ಐ ಮಂಗಳೂರು ನಗರ ಸಮಿತಿಯು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಕಾವೂರು ಜಾತ್ರೆ ಇಂದಿನಿಂದ ಆರಂಭಗೊಳ್ಳಲಿದೆ. ಈ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ. ಆದರೆ ಜ.10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ, ಎಸಿಪಿಯವರ ಗಮನಕ್ಕೆ ತಂದ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಆದರೆ ಶುಕ್ರವಾರ ಮತ್ತೆ ಇದೇರೀತಿ ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗದೆ ಎಂದು ಮನವಿಯಲ್ಲಿ ದೂರಲಾಗಿದೆ.

Exit mobile version