: ಪಡುಬಿದ್ರಿ: ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ, ಸಿರಿಮುಡಿ ದತ್ತಿನಿಧಿ ಟ್ರಸ್ಟ್ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ ಬಂಟ ಸಮಾಜದ ಪರವಾಗಿ ಇತ್ತೀಚೆಗೆ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಬಂಟ ಸಮಾಜದ ಹೆಮ್ಮೆಯ ನಾಯಕ ಕೊಡುಗೈ ದಾನಿ, ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿಯವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ” ಪ್ರಶಸ್ತಿಯನ್ನು ನೀಡಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿಯವರು ಬುಧವಾರ ಬೆಳಿಗ್ಗೆ ಪಡುಬಿದ್ರಿ ಬಂಟರ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಬೆಳಗ್ಗೆ 9:00 ಗಂಟೆಗೆ ಪಡುಬಿದ್ರಿ ಪೇಟೆಯಿಂದ ಬಂಟರ ಭವನದವರೆಗೆ ಅದ್ದೂರಿಯಾದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡಾ. ಕೆ ಪ್ರಕಾಶ್ ಶೆಟ್ಟಿ ದಂಪತಿ ಹಾಗೂ ಇತರ ಅತಿಥಿ ಗಣ್ಯರನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಗುವುದು. ಬೆಳಿಗ್ಗೆ 10:00 ರಿಂದ ಪಡುಬಿದ್ರಿ ಬಂಟರ ಸಂಘದ ಸದಸ್ಯರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಲಿದೆ. ಆ ಬಳಿಕ 10.30ರಿಂದ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ಸ್ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಸಿ.ಎ. ಅಶೋಕ ಶೆಟ್ಟಿ ಇವರು ನೆರವೇರಿಸಲಿದ್ದಾರೆ. ಸದ್ರಿ ಕಾರ್ಯಕ್ರಮಕ್ಕೆ ಇತರ ಎಲ್ಲಾ ಸಮಾಜ ಬಾಂಧವರಿಗೂ ಕೂಡ ಆಹ್ವಾನ ನೀಡಲಾಗಿದೆ. ಸಿರಿಮುಡಿ ದತ್ತಿನಿಧಿ ಮತ್ತು ಬಂಟರ ಸಂಘ ಪಡುಬಿದ್ರಿ ವತಿಯಿಂದ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ನೆರವಾಗಲು ವಿದ್ಯಾರ್ಥಿವೇತನ, ಸಮಾಜದ ಅಶಕ್ತರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ನೆರವು ಸೇರಿದಂತೆ ಹಲವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 15 ಲಕ್ಷ ರೂಪಾಯಿಗಳನ್ನು ವಿತರಿಸಲಾಗುವುದು. ಸಿರಿಮುಡಿ ದತ್ತಿನಿಧಿ ಪಡುಬಿದ್ರಿ ಇದರ ಸ್ಥಾಪಕರಾದ ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿಯವರ ನೇತೃತ್ವದಲ್ಲಿ ಸಮಾಜದ ದಾನಿಗಳಿಂದ ಸಂಗ್ರಹಿಸಿದ ಸುಮಾರು 1.31 ಕೋಟಿ ರೂಪಾಯಿಗಳನ್ನು ಶಾಶ್ವತ ಠೇವಣಿಯಾಗಿರಿಸಿ ಅದರಲ್ಲಿ ಬರುವ ಬಡ್ಡಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸದ್ರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರುಣಾಕರ ಆರ್. ಶೆಟ್ಟಿ, ಸಿ.ಎಂ.ಡಿ. ಪೆನಿನ್ಸುಲಾ ಗ್ರೂಪ್ ಆಫ್ ಹೊಟೇಲ್ಸ್, ಮುಂಬಯಿ ಮತ್ತು ಎರ್ಮಾಳು, ಸೀತಾರಾಮ ಶೆಟ್ಟಿ, ಮಾಜಿ ಅಧ್ಯಕ್ಷರು ಬಂಟ್ಸ್ ಸಂಘ ಪಿಂಪ್ರಿ ಚಿಂಚಿವಾಡ ಪುಣೆ ಇವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬರುವ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಆಯೋಜಿಸಲು ಉದ್ದೇಶಿಸಿರುವ ಅಂತರ್ ರಾಜ್ಯ ಬಂಟರ ಕ್ರೀಡಾಕೂಟ ಇದರ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಗುವುದು. ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸಮಾಜದ ಎಲ್ಲಾ ವರ್ಗದವರಿಗೂ ಅನುಕೂಲವಾಗುವ ಉದ್ದೇಶದಿಂದ ಸಿರಿಮುಡಿ ಕ್ರಿಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಯನ್ನು ಪ್ರಾರಂಭಿಸಲಾಗಿದ್ದು, ನೂತನ ಕಟ್ಟಡದ ನಿರ್ಮಾಣ ಭರದಿಂದ ಸಾಗುತ್ತಿದೆ. ಇದರ ಜೊತೆಗೆ ವಿಶ್ವ ಬಂಟರ ಸಂಘಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಎನಿಸಲಿರುವ ‘ಬಂಟಾಶ್ರಯ’ (ಕುಟುಂಬ ಸೇವಾಶ್ರಮ – ವೃದ್ಧಾಶ್ರಮ) ಯೋಜನೆಗೆ ಚಾಲನೆ ನೀಡಲಾಗುವುದು ಎಂದೂ ಡಾ. ದೇವೀ ಪ್ರಸಾದ್ ಶೆಟ್ಟಿ ಹೇಳಿದರು. ಸಿರಿಮುಡಿ ದತ್ತಿನಿಧಿ ಪಡುಬಿದ್ರಿ ಇದರ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿಯವರು ಮಾತನಾಡಿ, ಮಹಾರಾಷ್ಟ್ರ ಮತ್ತು ಮುಂಬಯಿಯನ್ನು ಕೇಂದ್ರೀಕರಿಸಿ, ಈಗಾಗಲೇ 1.31 ಕೋಟಿ ರೂಪಾಯಿಗಳನ್ನು ಶಾಶ್ವತ ಠೇವಣಿಯಾಗಿರಿಸಿ ಅದರಲ್ಲಿ ಬರುವ ಬಡ್ಡಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇನ್ನಷ್ಟು ಹಣವನ್ನು ಜಮೆ ಮಾಡುವ ಯೋಜನೆ ಇದೆ ಎಂದರು. ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ಎರ್ಮಾಳು ಶಶಿಧರ ಶೆಟ್ಟಿಯವರು ಟ್ರಸ್ಟ್ ಮಾಡುವ ಸಾಮಾಜಿಕ ಕಾರ್ಯಗಳ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಪಡುಬಿದ್ರಿ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಉಪಾಧ್ಯಕ್ಷರುಗಳಾದ ಪಲ್ಲವಿ ಸಂತೋಷ್ ಶೆಟ್ಟಿ, ಶ್ರೀನಾಥ್ ಹೆಗ್ಡೆ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಜಯ ಶೆಟ್ಟಿ ಪದ್ರ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಆರ್. ಶೆಟ್ಟಿ ಹಾಗೂ ಯುವ ವಿಭಾಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ ಉಪಸ್ಥಿತರಿದ್ದರು.
ಸೆ. 29 : ಪಡುಬಿದ್ರಿ ಬಂಟರ ಸಂಘದಲ್ಲಿ ಡಾ. ಕೆ. ಪ್ರಕಾಶ್ ಶೆಟ್ಟಿಯವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ” ಪ್ರಶಸ್ತಿ ಪ್ರದಾನ ಕಾರ್ಯಕ್ರಮ

