×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕುಂದಾಪುರ; ದಕ್ಷಿಣ ಕನ್ನಡದಂತೆ ಉಡುಪಿಯಲ್ಲೂ ಕನ್ನಡ ಕಡ್ಡಾಯವಾಗಲಿ : ಅ. ರಾ. ಪ್ರಭಾಕರ್ ರಾಜ್ ಪೂಜಾರಿ

ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಸ್ವಾಗತಾರ್ಹ. ಅದೇ ಮಾದರಿಯ ದಿಟ್ಟ ನಿರ್ಧಾರವನ್ನು ಉಡುಪಿ ಜಿಲ್ಲಾಧಿಕಾರಿಗಳು ಕೈಗೊಳ್ಳುವುದು ಯಾವಾಗ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ ಅ. ರಾ ಪ್ರಭಾಕರ್ ರಾಜ್ ಪೂಜಾರಿ ಅವರು ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ನೆರೆ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕನ್ನಡ ಅನುಷ್ಠಾನದ ಕುರಿತು ಅಲ್ಲಿನ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ ಸಾಂಸ್ಕೃತಿಕ ನಗರಿ, ಪರಶುರಾಮ ಸೃಷ್ಟಿಯ ಉಡುಪಿಯಲ್ಲಿ ಮಾತ್ರ ನಾಮಫಲಕಗಳಲ್ಲಿ ಕನ್ನಡ ಕಡೆಗಣಿಸಲ್ಪಡುತ್ತಿರುವುದು ವಿಷಾದನೀಯ. ಉಡುಪಿ ಜಿಲ್ಲಾಧಿಕಾರಿಗಳಿಗೂ ಇಂತಹ ಸದಾಚಾರದ ಮನಸ್ಸನ್ನು ದೇವರು ಬೇಗ ನೀಡಲಿ” ಎಂದು ಮಾರ್ಮಿಕವಾಗಿ ನುಡಿದರು.

ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳು ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಪರಭಾಷೆಯ ಹಾವಳಿ ಹೆಚ್ಚುತ್ತಿದೆ. ನಾಮಫಲಕಗಳಲ್ಲಿ ಕನ್ನಡದ ಅಕ್ಷರಗಳು ಮಾಯವಾಗುತ್ತಿವೆ ಅಥವಾ ಅತೀ ಸಣ್ಣದಾಗಿ ಕಾಣಿಸುತ್ತಿವೆ. ರಾಜ್ಯ ಸರ್ಕಾರದ ನಿಯಮದಂತೆ ಶೇ. 60ರಷ್ಟು ಕನ್ನಡ ಬಳಕೆಯಾಗಬೇಕು ಎಂಬ ನಿಯಮವಿದ್ದರೂ, ಜಿಲ್ಲೆಯಲ್ಲಿ ಇದರ ಅನುಷ್ಠಾನ ಕುಂಠಿತವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕರೆ ಮತ್ತು ಎಚ್ಚರಿಕೆ:

“ಕೇವಲ ಆದೇಶ ಹೊರಡಿಸಿದರೆ ಸಾಲದು, ಅದು ಕಾರ್ಯರೂಪಕ್ಕೆ ಬರಬೇಕು. ಉಡುಪಿ ಜಿಲ್ಲಾಡಳಿತವು ತಕ್ಷಣವೇ ಎಚ್ಚೆತ್ತುಕೊಂಡು ಜಿಲ್ಲೆಯಾದ್ಯಂತ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯು ಮುಂದಿನ ದಿನಗಳಲ್ಲಿ ಕನ್ನಡ ಉಳಿವಿನ ದೃಷ್ಟಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ,” ಎಂದು ರಾ ಪ್ರಭಾಕರ್ ಪೂಜಾರಿ ಜಿಲ್ಲಾಡಳಿತಕ್ಕೆ ಆಗ್ರಹಿಸಿದರು.

Leave a Reply

Your email address will not be published. Required fields are marked *