×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

ಉಡುಪಿ : ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆ.1ರಿಂದ 6ರವರೆಗೆ ನಡೆದ ‘ಭಾರತ ರಂಗ ಮಹೋತ್ಸವ -2026 ಹಾಗೂ ರಂಗ ಪರಿಷೆ ‘ ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವೆ, ಯಕ್ಷಗಾನ, ಜಾನಪದ, ಧಾರ್ಮಿಕ ಮೊದಲಾದ ರಂಗಗಳಲ್ಲಿ ನೀಡಿದ ಅನುಪಮ ಸೇವೆಯನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ. ವಿ ನಾಗರಾಜ ಮೂರ್ತಿ, ಕಲಾವಿದರಾದ ಸಿಹಿಕಹಿ ಚಂದ್ರು, ಸಿಹಿಕಹಿ ಗೀತಾ, ಚಲನಚಿತ್ರ ನಿರ್ದೇಶಕ ಕೆ.ಶಿವರುದ್ರಯ್ಯ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸಂಚಾಲಕರಾದ ರವೀಂದ್ರ ನಾಥ್ ಸಿರಿವರ, ಡಾ. ಟಿ. ಎಚ್. ಲವ ಕುಮಾರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಶಿವನಾಯಕ ದೊರೆ, ಕರ್ನಾಟಕ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ, ಚಾಂದ್‌ಪಾಷಾ, ಭಾರತ ರಂಗ ಮಹೋತ್ಸವದ ಸಂಚಾಲಕಿ ಡಾ. ವೀಣಾ ಶರ್ಮ ಭೂಸನೂರಮಠ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಲಯನ್ಸ್ ಸಂಸ್ಥೆಯಲ್ಲಿ 35 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ 2018ರಲ್ಲಿ ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಸಿಯ ಗವರ್ನರ್ ಆಗಿ ಲಯನ್‌ಗಳಿಗೆ ಮಾದರಿಯಾಗಿದ್ದಾರೆ. ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ 7 ವರ್ಷಗಳ ಕಾಲ ಮುನ್ನಡೆಸಿ ವಿದ್ಯಾಪೋಷಕ್‌ನಂತಹ ಸಾಮಾಜಿಕ ಕಾರ್ಯಗಳನ್ನು ನಿಭಾಯಿಸಿದರು. ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಜಾನಪದ ಕಲೆ, ಕಲಾವಿದರನ್ನು ಗುರುತಿಸುವ ಕಾರ್ಯ ಮಾಡಿದ್ದಾರೆ. 15 ವರ್ಷಗಳಿಂದ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರಾಗಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಇದೀಗ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಯಕ್ಷಗಾನ ಕಲೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಮಕ್ಕಳಲ್ಲಿ ನೈತಿಕ ಸಂಸ್ಕಾರವನ್ನು ಬೆಳೆಸುವ ನಿಟ್ಟಿನಲ್ಲಿ 400ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, 40,000ಕ್ಕೂ ಅಧಿಕ ನೈತಿಕ ಮೌಲ್ಯಗಳನ್ನು ಸಾರುವ ಪುಸ್ತಕಗಳನ್ನು ಹಂಚಿ ಸುಸಂಸ್ಕೃತ ಸಮಾಜ ನಿರ್ಮಾಣದ ಕನಸು ಕಂಡಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Leave a Reply

Your email address will not be published. Required fields are marked *