×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ವರ್ಣೋತ್ಸವ-2025 – ಉದ್ಘಾಟಿಸಿದ ಶ್ರೀನಿವಾಸ ತಂತ್ರಿ

ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಅಂತರ ಕಾಲೇಜು ತಾಂತ್ರಿಕ, ಮ್ಯಾನೇಜ್‌ಮೆಂಟ್ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ವರ್ಣೋತ್ಸವ-2025ನ್ನು ಗುರುವಾರ ಬೆಳಿಗ್ಗೆ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ ಶ್ರೀ ಪಿ ಶ್ರೀನಿವಾಸ ತಂತ್ರಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.  ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿ ಮತ್ತು ಪ್ರಸ್ತುತ ದಲ್ಲಾಸ್‌ನ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಲ್ಲಿ ಲೀಡ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪವನ್ ಕುಮಾರ್ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.  ಅವರು ತಮ್ಮ ಉದ್ಘಾಟನಾ ಮಾತಿನಲ್ಲಿ, ತಾವು ಕಾಲೇಜಿನಲ್ಲಿ ಕಳೆದ ದಿನಗಳನ್ನು ಮೆಲಕು ಹಾಕುತ್ತಾ ಸಾಮಾಜಿಕ ಮಾಧ್ಯಮಗಳನ್ನು ಸಮಾಜದ ಏಳಿಗೆಗೆ ಬಳಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.  ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯವನ್ನು ಉತ್ತಮ ಪಡಿಸಿಕೊಳ್ಳಲು ಕರೆನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿನಿ ಶ್ರೀಮತಿ ಉಷಾ ರಾಮಕೃಷ್ಣ ಭಟ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸಂಸ್ಥೆಯ ಶ್ರಮವನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳಿಗೆ ಗುರುಹಿರಿಯರನ್ನು ಗೌರವಿಸುವ ಪ್ರವೃತ್ತಿಯನ್ನು ರೂಢಿಸಿಕೊಳ್ಳುವಂತೆ ಹೇಳಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್‌ರವರು   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಕಲೆ ಮತ್ತು ಸಂಗೀತದಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದ ಜೊತೆಗೆ ಕಲೆ ಮತ್ತು ಸಂಗೀತವನ್ನು ಪ್ರವೃತ್ತಿಯಾಗಿ ಮುಂದುವರಿಸಬೇಕೆಂದು ಸಲಹೆಯಿತ್ತರು.  ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಸಂಸ್ಥೆಯ ಸಾಂಸ್ಕೃತಿಕ ಘಟಕದ ಸಂಯೋಜಕರಾದ   ರೋಶನ್ ಎಸ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ದೈಹಿಕ ಶಿಕ್ಷಣ ನಿರ್ದೇಶಕರಾದ ಪೌಲ್ ಸೂರಜ್ ಕ್ರೀಡಾಚಟುವಟಿಕೆಗಳ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಡಾ. ರವಿಪ್ರಭಾ ಕೆ ಕಾಲೇಜು ಮಟ್ಟದ ಮಂಥನ – ಸಾಂಸ್ಕೃತಿಕ ಮತ್ತು ತಾಂತ್ರಿಕ ಚಟುವಟಿಕೆಗಳ ವಿಜೇತರ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿನಿ ಕು. ಶ್ರಾವ್ಯ ತಂತ್ರಿ ಅತಿಥಿಗಳನ್ನು ಸ್ವಾಗತಿಸಿದರು. ಕು. ರಕ್ಷಾ ಶೆಟ್ಟಿ ಪ್ರಾರ್ಥಿಸಿ ಕುಮಾರಿ ಪ್ರೇರಣಾ ರಾವ್ ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಹರ್ಷಲ್ ಡಿಮೆಲ್ಲೊ ಮತ್ತು ಕು. ಮಾನ್ಸಿ ರಾವ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *