ಉಡುಪಿ, ಜು.21: ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಸೋಮವಾರ ಉಡುಪಿ ತಾಲೂಕು ಕಚೇರಿ ಎದುರು ಹಮ್ಮಿಕೊಳ್ಳಲಾಗಿತ್ತು.ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಬಿಜೆಪಿ ತನ್ನ ಅವಧಿಯಲ್ಲಿ ಮಾಡಿದ ತಪ್ಪು ಕೆಲಸಗಳನ್ನು ಕಾಂಗ್ರೆಸ್ ಪಕ್ಷದ ಮೇಲೆ ಹೊರಿಸುತ್ತಿದೆ. 2014ರಲ್ಲಿ ಮಂಜೂರಾದ ತೀರ್ಥಹಳ್ಳಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇನ್ನೂ ಸಂಪೂರ್ಣ ಆಗಿಲ್ಲ. ಇಂದ್ರಾಳಿ ಸೇತುವೆ ಕಾಮಗಾರಿ ಇನ್ನೂ ಮುಗಿದಿಲ್ಲ. ದೂಷಣೆ ಮಾಡುವುದು ಮತ್ತು ಸುಳ್ಳು ಹೇಳುವುದನ್ನೇ ಬಿಜೆಪಿ ಕರಗತ ಮಾಡಿಕೊಂಡಿದೆ. ನಿರುದ್ಯೋಗ ಸಮಸ್ಯೆ ಪರಿಹಾರವೇ ಆಗಿಲ್ಲ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿಲ್ಲ ಎಂದರು.ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಬಿಜೆಪಿ ಕಾಂಗ್ರೆಸ್ ವಿರುದ್ಧ ಎಲ್ಲ ಗ್ರಾಪಂ ಎದುರು ಪ್ರತಿಭಟನೆ ಮಾಡಿ, ಸುಳ್ಳು ಪ್ರಚಾರ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದೆ. ಈ ರೀತಿ ಸುಳ್ಳು ಹರಡಲು ಬಿಜೆಪಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನೇ ಬಳಸಿಕೊಳ್ಳುತ್ತಿದೆ. ಅವರಿಗೆ ಬಿಜೆಪಿ ಈ ಗ್ಯಾರಂಟಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಗೊತ್ತೇ ಇಲ್ಲ. ನರೇಂದ್ರ ಮೋದಿ ಚುನಾವಣೆ ಪೂರ್ವದಲ್ಲಿ ಹೇಳಿದ ಯಾವುದೇ ಭರವಸೆಯನ್ನು ಅಧಿಕಾರಕ್ಕೆ ಬಂದ ನಂತರ ಅನುಷ್ಠಾನಕ್ಕೆ ತರಲಿಲ್ಲ. ಕೇವಲ ಪ್ರಚಾರಕ್ಕಾಗಿಯೇ ಕಾರ್ಯಕ್ರಮಗಳನ್ನು ಮಾಡುತ್ತಾರೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ಅಮೃತ್ ಶೆಣೈ ಮಾತನಾಡಿದರು. ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್, ಮುಖಂಡರಾದ ವರೋನಿಕಾ ಕರ್ನೆಲಿಯೋ, ಅಣ್ಣಯ್ಯ ಶೇರಿಗಾರ್, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಅಮೃತಾ ಕೃಷ್ಣಮೂರ್ತಿ, ಶರ್ಫುದ್ದೀನ್ ಶೇಕ್, ಗಣೇಶ್ ನೆರ್ಗಿ ಮೊದಲಾದವರು ಉಪಸ್ಥಿತರಿದ್ದರು

