ಉಚ್ಚಿಲ: ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ ರಲ್ಲಿ ಶನಿವಾರ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ‘ಸಾಮೂಹಿಕ ದಾಂಡಿಯಾ ನೃತ್ಯ’ ನೋಡುಗರ ಗಮನ ಸೆಳೆಯಿತು.
ಕ್ಷೇತ್ರದ ರಥಬೀದಿಯ ಸುತ್ತ ಮಹಿಳೆಯರು, ಮಕ್ಕಳು, ಯುವಕರು ಹಾಗೂ ವೃದ್ಧರು ಎನ್ನದೆ ಆಸಕ್ತರೆಲ್ಲರೂ ಸಂಭ್ರಮದಿಂದ ದಾಂಡಿಯಾ ನೃತ್ಯಕ್ಕೆ ಹೆಜ್ಜೆ ಹಾಕುವ ದೃಶ್ಯ ಕಂಡು ಬಂತು.
ಹೆಚ್ಚಿನ ಮಹಿಳೆಯರು, ಯುವತಿಯರು ಸಾಂಪ್ರದಾಯಿಕ ಶೈಲಿಯ ದಿರಿಸಿನೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
ನೃತ್ಯ ನೋಡಲೆಂದೇ ನೂರಾರು ಸಂಖ್ಯೆಯಲ್ಲಿ ಜನರು ದೇವಸ್ಥಾನಗಳ ಸುತ್ತಮುತ್ತ ಜಮಾಯಿಸಿದ್ದು, ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಗರ್ಬಾ ನೃತ್ಯದಲ್ಲಿ ಅಬಾಲವೃದ್ದರು ಸಿನಿಮಾ ಹಾಡಿಗೆ ವೃತ್ತಾಕಾರದಲ್ಲಿ ಹೆಜ್ಜೆ ಹಾಕಿದರು.
ಸರಿಸುಮಾರಿ ಒಂದೂವರೆ ಗಂಟೆಗಳ ಕಾಲ ದಾಂಡಿಯಾ ನೃತ್ಯ ನಡೆಯಿತು.
ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ರವರು ಹಾಗೂ ಮತ್ತಿತರ ಗಣ್ಯರು ಸೇರಿ ದಾಂಡಿಯಾ ನೃತ್ಯಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ ಮತ್ತು ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.

