ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆ.7ರಂದು ಶುಕ್ರವಾರ ಸಂಜೆ ಹುತ್ತುರ್ಕೆ ಬಳಿ ಸಂಭವಿಸಿದೆ.
ಮೃತರನ್ನು ಹೆಬ್ರಿ ಸಂತೆಕಟ್ಟೆಯ ಸದಾನಂದ ನಾಯಕ್ (55) ಎಂದು ಗುರುತಿಸಲಾಗಿದೆ.
ಸದಾನಂದ ನಾಯಕ್ ಅವರು ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೃಹತ್ ಮರವೊಂದು ಏಕಾಏಕಿ ರಸ್ತೆಗೆ ಉರುಳಿ ಬಿದ್ದಿದೆ. ಮರದೊಂದಿಗೆ ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿಗಳೂ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಮರ, ಕಂಬ ಮತ್ತು ತಂತಿಗಳ ನಡುವೆ ಸಿಲುಕಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಚಾಲಕ ಸದಾನಂದ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಮರವನ್ನು ಕ್ರೇನ್ ಮೂಲಕ ತೆರವುಗೊಳಿಸಿ, ಕಾರಿನೊಳಗೆ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು.
ಹೆಬ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


