
ಕಾಪು : ರಕ್ತದಾನ ಮಹಾದಾನವಾಗಿದ್ದು ದೇಶದಲ್ಲಿ ಶೇ. 20 ರಷ್ಟು ರಕ್ತದ ಕೊರತೆ ಕಾಡುತ್ತಿದೆ. ರಕ್ತದ ಅಲಭ್ಯತೆಯಿಂದಾಗಿ ಬಹಳಷ್ಟು ಮಂದಿ ಸಾವಿಗೀಡಾಗುತ್ತಿದ್ದು ನಾವೆಲ್ಲರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಮುಂದಾಗ ಬೇಕಿದೆ ಎಂದು ಉಡುಪಿ ಜಿಲ್ಲಾಸ್ಪತ್ರೆಯ ರಕ್ತ ನಿದಿ ಕೇಂದ್ರದ ಮುಖ್ಯಸ್ಥೆ ಡಾ| ವೀಣಾ ಕುಮಾರಿ ಹೇಳಿದರು. ಕಾಪು ಧರಣಿ ಸಮಾಜ ಸೇವಾ ಸಂಘ, ಕಾಪು ಜೇಸಿಐ, ಕಾಪು ವಲಯ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಮತ್ತು ರಕ್ತ ನಿದಿ ಕೇಂದ್ರದ ಸಹಯೋಗದಲ್ಲಿ ಕಾಪು ವೀರಭದ್ರ ಸಭಾಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ದಾಖಲೆಯ 60 ನೇ ಬಾರಿ ರಕ್ತದಾನ ಮಾಡಿದ ಸೂರಿ ಶೆಟ್ಟಿ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಲೀಲಾಧರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಾಪು ಪೊಲೀಸ್ ಠಾಣಾದಿಕಾರಿ ಶ್ರೀಶೈಲ ಮುರಗೋಡ, ಕಾಪು ಪುರಸಭೆ ಮುಖ್ಯಧಿಕಾರಿ ವೆಂಕಟೇಶ ನಾವಡ, ಕಾಪು ಉಪ ವಲಯ ಅರಣ್ಯಾಧಿಕಾರಿ ಜೀವನ್ದಾಸ್ ಶೆಟ್ಟಿ, ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಜೇಸಿಐ ಅಧ್ಯಕ್ಷ ಸುಜಿತ್ ಶೆಟ್ಟಿ ಪಾದೂರು, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ನ ಅಧ್ಯಕ್ಷ ರಘುರಾಮ ಶೆಟ್ಟಿ ಕೊಪ್ಪಲಂಗಡಿ ಮತ್ತಿತರರು ಉಪಸ್ಥಿತರಿದ್ದರು.

